ಅಕಟಕಟ ಸಂಸಾರವನು ನೆಚ್ಚಿ ಕೆಡಬ್ಯಾಡ

ಅಕಟಕಟ ಸಂಸಾರವನು ನೆಚ್ಚಿ ಕೆಡಬ್ಯಾಡ

(ಕಲ್ಯಾಣಿ ರಾಗ ಝಂಪೆತಾಳ)

ಅಕಟಕಟ ಸಂಸಾರವನು ನೆಚ್ಚಿ ಕೆಡಬ್ಯಾಡ ||ಪ||

ವಿಕಟದಲಿ ಮಾನವರು ಕೆಟ್ಟರೆಲ್ಲರು ನಿಜ ||ಅ.ಪ||

 

ಮುನ್ನ ನರಕಾಸುರನು ಬಡಿದು ಚಿಂತಾಮಣಿಯ

ತನ್ನ ಮನೆಯಲಿ ತಂದು ನಿಲ್ಲಿಸಿ ನೃಪರ

ಕನ್ನೆಯರ ಷೋಡಶಸಹಸ್ರವನೆ ತಂದಾತ

ಹೆಣ್ಣನೊಬ್ಬಳನೊಯ್ದುದಿಲ್ಲವೊ ನೋಡೊ ||೧||

 

ಸಾವಿರ ಕರ ಪಡೆದ ಕಾರ್ತವೀರ್ಯಾರ್ಜುನನು

ಭೂವಲಯದೊಳಗೇ ವೀರನೆನಿಸಿ

ರಾವಣನ ಸೆರೆಯಿಟ್ಟು ಕಾಮಧೇನುವ ಬಯಸಿ

ಸಾವಾಗ ಏನು ಕೊಂಡೊಯ್ದನೋ ನೋಡೊ ||೨||

 

ಕೌರವನು ಧರೆಯೆಲ್ಲ ತನಗಾಗಬೇಕೆಂದು

ವೀರಪಾಂಡವರೊಡನೆ ಕದನಮಾಡಿ

ಮಾರಿಯ ವಶವೈದಿ ಹೋಹಾಗ ತನ್ನೊಡನೆ

ಶ್ಯಾರೆ ಭೂಮಿಯ ಒಯ್ದುದಿಲ್ಲವೊ ನೋಡೊ ||೩||

 

ವರಯಜ್ಞಗಳ ಮಾಡಿ ನಹುಷ ಸುರಪತಿಯೆನಿಸಿ

ಪರಮಮುನಿಗಳ ಕೈಲೆ ದಂಡಿಗೆಯ ಹೊರಿಸಿ

ಉರಗಜನುಮವನೈದಿ ಹೋಹಾಗ ತನ್ನೊಡನೆ

ಸುರಲೋಕದೊಳಗೇನ ಕೊಂಡ್ಹೋದ ನೋಡೊ ||೪||

 

ತುಂಗಗುಣ ಧ್ರುವ ವಿಭೀಷಣ ಹನುಮಾದಿಗಳು

ಮಂಗಳಾತ್ಮಕ ಹರಿಯನರಿತು ಭಜಿಸಿ

ಭಂಗವಿಲ್ಲದೆ ಹೊರೆದರೈ ಸಕಲ ಭಾಗ್ಯವನು

ರಂಗವಿಠಲರೇಯನ ನೆರೆ ನಂಬಿರೋ ||೫||

ದಾಸ ಸಾಹಿತ್ಯ ಪ್ರಕಾರ
ಬರೆದವರು